ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತಂತೆ ಗಾಣಿಗ ಸಮುದಾಯದ ಧ್ವನಿ ಜೋರಾಗುತ್ತಿದ್ದು, ಇದೀಗ ಅದಕ್ಕೆ ಸಮಾಜದ ಮುಖಂಡ, ಹಿರಿಯ ರಾಜಕಾರಣಿ ಬಿ.ಜೆ. ಪುಟ್ಟಸ್ವಾಮಿ ಅವರು ಕೂಡ ದನಿಗೂಡಿಸಿದ್ದಾರೆ. ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿರುವ ಬಿ.ಜೆ. ಪುಟ್ಟಸ್ವಾಮಿಯವರು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಅಖಿಲ ಕರ್ನಾಟಕ ಗಾಣಿಗರ ಸಂಘದ ಪದಾಧಿಕಾರಿಗಳ ನಿಯೋಗವು ಬಿ.ಜೆ. ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದೆ. ರಾಜ್ಯದಲ್ಲಿ ಗಾಣಿಗ ಸಮುದಾಯದವರು ಸುಮಾರು 12 ಲಕ್ಷದಷ್ಟಿದ್ದು, ಸಮುದಾಯದ ಅಭಿವೃದ್ಧಿ ಸಲುವಾಗಿ ಪ್ರತ್ಯೇಕವಾಗಿ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅತ್ಯಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ಸಮುದಾಯಕ್ಕೆ ನೆರವಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಕೋರಿಕೊಂಡರು.
ಗಾಣಿಗ ಸಮುದಾಯದ ಬೇಡಿಕೆಯನ್ನು ವಿಶೇಷವಾಗಿ ಪರಿಗಣಿಸಿ ಅದನ್ನು ಈಡೇರಿಸಲು ಕಾಳಜಿ ವಹಿಸಬೇಕು ಎಂದು ಪುಟ್ಟಸ್ವಾಮಿಯವರೂ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡರು. ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ಎಂ.ಎಸ್. ಶ್ರೀನಿವಾಸಮೂರ್ತಿ, ಪ್ರಧಾನ ಕಾರ್ಯದರ್ಶಿ ವಿ. ಮುನಿಚೆಟ್ಟಿ, ಖಜಾಂಚಿ ಎಂ. ಶ್ರೀನಿವಾಸ ಶೆಟ್ಟಿ ಅವರು ಸಂಘದ ಅಧಿಕೃತ ಲೆಟರ್ ಹೆಡ್ ಮೂಲಕ ಮುಖ್ಯಮಂತ್ರಿ ಅವರಿಗೆ ಬೇಡಿಕೆ ಸಲ್ಲಿಸಿ, ನಿಗಮ ಸ್ಥಾಪನೆ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.
ಗಾಣಿಗ ಸಮಾಜಕ್ಕೂ ನಿಗಮ ಸ್ಥಾಪಿಸಿ; ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ