ಬೆಂಗಳೂರು: ಭದ್ರಾವತಿಯ ಶಾಸಕ, ಕಾಂಗ್ರೆಸ್ ಪಕ್ಷದ ಬಿ.ಕೆ. ಸಂಗಮೇಶ್ ಅವರ ಪುತ್ರ, ಬೆಂಬಲಿಗರು ಹಾಗೂ ಕಾರ್ಯಕರ್ತರ ಮೇಲಿನ ಮೊಕದ್ದಮೆಯನ್ನು ಪೊಲೀಸ್ ಇಲಾಖೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ವಿಜಯಪುರ ಜಿಲ್ಲೆ ಕೊಲ್ಹಾರ ದಿಗಂಬರೇಶ್ವರ ಸಂಸ್ಥಾನ ಮಠದ ಜಗದ್ಗುರು ಯೋಗಿ ಶ್ರೀ ಕಲ್ಲಿನಾಥ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಗಾಣಿಗ ಸಮುದಾಯದ ಸ್ವಾಮೀಜಿಗಳಲ್ಲಿ ಒಬ್ಬರಾಗಿರುವ ಇವರು, ಭದ್ರಾವತಿಯಲ್ಲಿ ಬಿಜೆಪಿಯಿಂದ ಅಂಥ ಅಭ್ಯರ್ಥಿ ಇಲ್ಲ. ಹೀಗಾಗಿ ಸಂಗಮೇಶ್ ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಅದರ ಒಂದು ಭಾಗವಾಗಿ ಶಾಸಕ ಸಂಗಮೇಶ್ ಅವರ ಪುತ್ರ, ಬೆಂಬಲಿಗರು ಹಾಗೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಆರೋಪಿಸಿದ್ದು, ಕೇಸ್ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಬೆಳವಣಿಗೆ ಹಿನ್ನೆಲೆಯಲ್ಲಿ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಶನಿವಾರ ಸಂಗಮೇಶ್ ಸುದ್ದಿಗೋಷ್ಠಿ ನಡೆಸಿದ್ದ ವೇಳೆ, ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಶಾಸಕ ಸಂಗಮೇಶ್, ಬಿಜೆಪಿಯವರು ವಿಧಾನಸಭೆಯಲ್ಲಿ ನನ್ನನ್ನು ಅಮಾನತು ಮಾಡಿಸಿದ್ದಲ್ಲದೆ, ಭದ್ರಾವತಿಯಲ್ಲಿ ನನ್ನ ಹಾಗೂ ನನ್ನ ಮಗನ ಮೇಲೆ ಪೊಲೀಸರಿಂದ ಕೊಲೆ ಕೇಸ್ ಹಾಕಿಸಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿಯನ್ನು ಬೆಳೆಸಲು, ಕೆ.ಎಸ್. ಈಶ್ವರಪ್ಪ ಹಾಗೂ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಈ ಮೂಲಕ ಸಂಚು ನಡೆಸಿದ್ದಾರೆ ಎಂದು ಸಂಗಮೇಶ್ ಆರೋಪ ಮಾಡಿದ್ದಾರೆ.
ಸಂಬಂಧಿತ ಸುದ್ದಿ: ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಶ್ರೀ ಕಲ್ಲಿನಾಥ ಸ್ವಾಮೀಜಿ ಮನವಿ